ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ನಾವು ಸರ್ಕಾರ ರಚಿಸಲ್ಲ, ಆದರೆ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ. ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರದಲ್ಲಿ ಎನ್ಡಿಎ ಸರ್ಕಾರದ 11 ವರ್ಷಗಳ ಆಡಳಿತವನ್ನು ಗುರುತಿಸಲು ನಡೆದ ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವವರೆಗೆ ತಾನು ವಿಶ್ರಮಿಸುವುದಿಲ್ಲ ಎಂದು ಘೋಷಿಸಿದ ಅವರು, ಕೇಂದ್ರದೊಂದಿಗೆ ಸಮನ್ವಯದಿಂದ ಡಬಲ್ ಎಂಜಿನ್ ಸರ್ಕಾರವಾಗಿ ಕೆಲಸ ಮಾಡುವುದಾಗಿ ಹೇಳಿದರು.
ಹಳೇ ಮೈಸೂರು ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳುವ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದರು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದರು.
ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದರು.
