BENGLORE. SEP 08: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೂ ಕಲರ್ಫುಲ್ ಬಟ್ಟೆ ತೊಟ್ಟು, ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಎರಡ್ಮೂರು ಪ್ರಕರಣಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಇದೀಗ ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ ಸಂಕಷ್ಟ ತಂದಿಟ್ಟಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಸಿಕ್ಕ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿದ ಆರೋಪ ಸಂಬಂಧ ಪೊಲೀಸರು, ತನಿಖೆ ತೀವ್ರಗೊಳಿಸಿದ್ದು, ಮೊಬೈಲ್ ಹೇಗೆ ಬಂತು? ಯಾರದ್ದು ಎನ್ನುವುದನ್ನು ಪತ್ತೆ ಮಾಡಲು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್ಗೆ ಮನವಿ ಮಾಡಿದ್ದರು. ಇಂದು (ಸೆಪ್ಟೆಂಬರ್ 08) ಈ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42 ಎಸಿಜೆಎಂ ಕೋರ್ಟ್, ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಇಬ್ಬರನ್ನ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗ ನಡೆಸಿದ ದಾಳಿಯಲ್ಲಿ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಈ ಮೊಬೈಲ್ನಲ್ಲಿ ಫೇಸ್ಬುಕ್, ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್, ನೆಟ್ಫ್ಲಿಕ್ಸ್ ಹಾಗೂ ಅಮೆಜಾನ್ ಪ್ರೈಮ್ನಂತಹ ಆಪ್ಗಳು ಇದ್ದವು. ಮನೆಯವರು ಹಾಗೂ ವಕೀಲರ ಜತೆ ಮಾತನಾಡಲು ಇದನ್ನು ಬಳಸುತ್ತಿದ್ದುದು ಬೆಳಕಿಗೆ ಬಂದಿತ್ತು.ಮೊಬೈಲ್ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.
ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಕ್ರಮ ಬಳಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ನಲ್ಲಿ ಪ್ರತಾಪ್ ಎಂಬಾತನನ್ನು ಮೊದಲ ಆರೋಪಿ (A1) ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎರಡನೇ ಆರೋಪಿ (A2) ಆಗಿದ್ದು, ಜೈಲಿನೊಳಗೆ ಮೊಬೈಲ್ ತಲುಪಿದ್ದು ಹೇಗೆ ಮತ್ತು ಯಾರ ಸಹಕಾರದೊಂದಿಗೆ ಸಂವಹನ ನಡೆಸಲಾಗುತ್ತಿತ್ತು ಎಂಬ ಕುರಿತು ಸತ್ಯಾಸತ್ಯತೆಯನ್ನು ಹೊರತರಲು ಇಬ್ಬರೂ ಆರೋಪಿಗಳನ್ನು ಕಸ್ಟಡಿಗೆ ಪಡೆದು ಮುಖಾಮುಖಿ ವಿಚಾರಣೆ ನಡೆಸಲು ತನಿಖಾ ತಂಡ ಸಿದ್ಧತೆ ಮಾಡಿಕೊಂಡಿದೆ.
ಹೀಗಾಗಿ ತನಿಖೆಯನ್ನು ಮುಂದುವರಿಸಲು ಆರೋಪಿಯಯನ್ನು ವಶಕ್ಕೆ ಪಡೆಯುತ್ತಿರುವುದು ಅತ್ಯಗತ್ಯವಾಗಿರುವ ಹಿನ್ನೆಲೆಯಲ್ಲಿ, ಪೊಲೀಸರು ಇಂದು (ಸೆಪ್ಟೆಂಬರ್ 08) ಪ್ರಜ್ವಲ್ ರೇವಣ್ಣನನ್ನ 42ನೇ ಎಸಿಎಂಎಂ (ACMM) ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದರು.
